ನಾನು : ಸರ್ ನಮಸ್ಕಾರ ನಾನು ವಿಜಯ್ ಅಂತ, ವಿಜಯ್ ಹೆರಗು ನಿಮ್ಮ ಫೇಸ್ಬುಕ್ ಗೆಳೆಯ
ವಿ.ಭಟ್ : ಹೇಳಿ ವಿಜಯ್
ನಾನು : ಸರ್ ನಾನು ನಿಮ್ಮ ಟಿವಿ ಚಾನೆಲ್ ನೋಡ್ತಾ ಇದ್ದೀನಿ.ನಂದೊಂದು request ನೀವು ತೋರಿಸ್ತಾ ಇರೋ ವೀಡಿಯೊ ತುಂಬಾ ಕೆಟ್ಟದಾಗಿದೆ. blur ಆಗಿ (ಮಸುಕಾಗಿ) ತೋರಿಸಿ.
ವಿ.ಭಟ್ : ನೀವೇನೋ blur ಆಗಿ ತೋರಿಸಿ ಅಂತೀರ, ನಾವೂ ಮೊದ್ಲು ಹಾಗೇ ತೋರಿಸ್ತಾ ಇದ್ವಿ ಆದ್ರೆ ಸಾಕಷ್ಟು ಜನ phone ಮಾಡಿ ಉಗೀತಾ ಇದಾರೆ ...... blur ಮಾಡ್ಬೇಡಿ ಹಾಗೇ ತೋರಿಸಿ ಅಂತ.
ನಾನು : ಹಾಗಲ್ಲ ಸರ್, ಮನೆಯಲ್ಲಿ ಮಕ್ಕಳು-ಮರಿ ನೋಡ್ತಾ ಇರ್ತಾರೆ ಇಷ್ಟು ಕೀಳು ಅಭಿರುಚಿ ವೀಡಿಯೊ ತೋರಿಸಿದ್ರೆ ಹೇಗೆ?
ವಿ.ಭಟ್ : ಈಗ ಸ್ವಲ್ಪ ಮುಂಚೆ ನನಗೊಬ್ಬ ಹಿರಿಯರು call ಮಾಡಿ thanks ಹೇಳಿದ್ರು, ನಂಗೆ ಬ್ಲೂ ಫಿಲಂ ಅಂದ್ರೆ ಗೊತ್ತಿರ್ಲಿಲ್ಲ ಈಗ ನಿಮ್ ಚಾನೆಲ್ ನೋಡಿ ಗೊತ್ತಾಯ್ತು ಅಂದ್ರು. ಮೊದ್ಲು blur ಆಗಿ ತೋರಿಸಿದ್ವಿ ಈಗ detail ಆಗಿ ತೋರಿಸ್ತೀವಿ.
ನಾನು : ನೋಡೀ ಸರ್, ಒಂದು ಜವಾಬ್ದಾರಿಯುತ ಮಾಧ್ಯಮದಲ್ಲಿರುವ ನೀವು ಹೀಗೆ ಮಾತಾಡೋದು ಸರಿಯಲ್ಲ, ಸದನದಲ್ಲಿ ಅಶ್ಲೀಲ ವೀಡಿಯೊ ನೋಡಿ ಆ ಮಿನಿಸ್ಟರುಗಳು ತಪ್ಪು ಮಾಡಿದ್ದಾರೆ ನಿಜ........ ಆದ್ರೆ ನೀವು ಅದೇ ವೀಡಿಯೊಗಳನ್ನು ಇಡೀ ಕರ್ನಾಟಕಕ್ಕೇ ತೋರಿಸ್ತಾ ಇದ್ದೀರ, ಮನೆಯಲ್ಲಿ ದೊಡ್ಡವರ - ಚಿಕ್ಕವರ ಜೊತೆ ಕುಳಿತು ನ್ಯೂಸ್ ನೋಡೋಕೆ ಮುಜುಗರ ಹಾಗೋ ಹಾಗೆ ಕ್ಲಿಪ್ಪಿಂಗ್ಸ್ ತೋರಿಸ್ತಿದ್ದೀರಲ್ಲ..... ಆ ಮಿನಿಸ್ಟರುಗಳಿಗೂ ನಿಮಗೂ ಏನು ವ್ಯತ್ಯಾಸ
ವಿ.ಭಟ್ : ಇಲ್ಲ ನಾವು ಹಾಗೆ ತೋರಿಸದಿದ್ರೆ ಜನ ನಮಗೆ ಉಗೀತಾರೆ ಅಷ್ಟೇ
ನಾನು : ನೋಡಿ ಸರ್ ನಿಮಗೂ ಒಬ್ಬ ಮಗ ಇದ್ದಾನೆ, ಅವನ ಜೊತೆ ಕೂತ್ಕೊಂಡು ನೋಡಬಹುದಾದ quality ನಿಮ್ಮ ವೀಡಿಯೊ ಕ್ಲಿಪ್ಪಿಂಗುಗಳಿಗೆ ಇದೆ ಅಂತ ನಿಮಗೆ ಅನ್ನಿಸಿದ್ರೆ ಧಾರಾಳವಾಗಿ ಪ್ರಸಾರ ಮಾಡಿ .......
ಇಷ್ಟು ಹೇಳಿ ನಾನು ಫೋನ್ disconnect ಮಾಡಿದೆ. ಇದಿಷ್ಟೂ ನಡೆದಿದ್ದು ನಿನ್ನೆ ರಾತ್ರಿ 11 ಗಂಟೆಯ ಸಮಯದಲ್ಲಿ. ಲಕ್ಷ್ಮಣ ಸವದಿ ಹಾಗೂ ಸಿ ಸಿ ಪಾಟೀಲರ ಕೀಳು ಅಭಿರುಚಿ ಇಷ್ಟಕ್ಕೆಲ್ಲ ಕಾರಣ. ವಿಧಾನಸಭೆಯ ಕಲಾಪದ ಸಮಯದಲ್ಲಿ ಕಾಮಕೇಳಿಯ ವೀಡಿಯೊ ನೋಡುತ್ತಿದ್ದ ಈ ಪುಡಾರಿಗಳ ನಿಜ ಬಣ್ಣ ಬಯಲು ಮಾಡಿದ ಮಾಧ್ಯಮಗಳ ಕಾರ್ಯ ನಿಜಕ್ಕೂ ಶ್ಲಾಘನೀಯ.
24 X 7 ನ್ಯೂಸ್ ಚಾನಲ್ಲುಗಳ ಸಂಖ್ಯೆ ಹೆಚ್ಚಿದಂತೆ TRP (Target rating point ) ಸಮರ ಹೆಚ್ಚುತ್ತಿದೆ. ದಿನವಿಡೀ ಬ್ರೇಕಿಂಗ್ ನ್ಯೂಸ್ ಬಿತ್ತರಿಸುವ ಅನಿವಾರ್ಯತೆ ಎದುರಿಸುತ್ತಿರುವ ನ್ಯೂಸ್ ಚಾನಲ್ಲುಗಳು ಇಂತಹ ಗಿಮಿಕ್ಕುಗಳಿಗೆ ಇಳಿಯುತ್ತವೆ. "ನೇರ, ದಿಟ್ಟ , ನಿರಂತರ" ಸುದ್ದಿ ಬಿತ್ತರಿಸುವ ಭರದಲ್ಲಿ ಮಾಧ್ಯಮಗಳಿಗೆ ಇರಬೇಕಾದ ಸಾಮಾಜಿಕ ಕಾಳಜಿ, ಪತ್ರಿಕಾ ಧರ್ಮ, ನೀತಿ ನಿಯಮಗಳನ್ನು ಮರೆಯುತ್ತವೆ.
ನಿನ್ನೆ ವಿಧಾನಸಭೆಯಲ್ಲಿ ನಡೆದ ಘಟನೆ ನಿಜಕ್ಕೂ ಅಸಹ್ಯಕರ. ಆದರೆ ಇಂತಹ ಅಸಹ್ಯಗಳು ವಿಧಾನಸಭೆಯಲ್ಲಿ, ಲೋಕಸಭೆಯಲ್ಲಿ ಹಲವು ಬಾರಿ ನಡೆದಿವೆ. ಹಣದ ಆಸೆಗೆ ಬಿದ್ದು ತಮ್ಮನ್ನೇ ಮಾರಿಕೊಂಡ ಸಂಸದರು, ಲೋಕಸಭೆಯಲ್ಲಿ ಲೋಕಪಾಲ್ ಮಸೂದೆಯ ಪ್ರತಿಯನ್ನು ಹರಿದೆಸೆದ ಸಂಸದರು, ವಿಧಾನಸಭೆಯಲ್ಲಿ ಕುರ್ಚಿಗಳನ್ನು,ಚಪ್ಪಲಿಗಳನ್ನೂ ಎಸೆದಾಡಿದ ಶಾಸಕರು ....ಒಂದೆರಡಲ್ಲ ಹತ್ತಾರು ಉದಾಹರಣೆಗಳನ್ನು ನಮ್ಮ ದೇಶದ ರಾಜಕಾರಣಿಗಳು ನಮಗಾಗಿ ಇತಿಹಾಸದಲ್ಲಿ ಉಳಿಸಿದ್ದಾರೆ.
ಬೇರೆಯವರು ಮಾಡಿದ ತಪ್ಪನ್ನು ತೋರಿಸುವ ಭರದಲ್ಲಿ ನಾವೂ ತಪ್ಪು ಹಾದಿ ತುಳಿಯದಂತೆ ಎಚ್ಚರವಹಿಸಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯ. ಯಾರೋ ಮಾಡಿದ ಅವಿವೇಕಕ್ಕೆ ಅತಿರೇಕದ ಸುದ್ದಿ ಬಿತ್ತರಿಸುವುದು ಸರಿಯಲ್ಲ. ಇನ್ನಾದರೂ ನಮ್ಮ 24 X 7 ಸುದ್ದಿವಾಹಿನಿಗಳು ಎಚ್ಚೆತ್ತುಕೊಂಡು ಕೇವಲ ಮಾರುಕಟ್ಟೆ ದೃಷ್ಟಿಯಿಂದ ಹೊರಬಂದು ಮಾಧ್ಯಮಗಳ ಘನತೆಯನ್ನು ಎತ್ತಿಹಿಡಿಯಬೇಕಿದೆ.